Back To Top

 ಪ್ರಾಣಿಗಳಂತೆ ಭಾರತೀಯರ ಗಡಿಪಾರು: ಡಿಸಿಎಂ ಡಿಕೆಶಿ ಆಕ್ರೋಶ
February 10, 2025

ಪ್ರಾಣಿಗಳಂತೆ ಭಾರತೀಯರ ಗಡಿಪಾರು: ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಭಾರತದ ಅಕ್ರಮ ವಲಸಿಗರನ್ನು ಅಮೆರಿಕಾ ಕೈದಿಗಳಂತೆ ನಡೆಸಿಕೊಂಡಿರುವುದನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತದ ವಲಸಿಗರು ಮನುಷ್ಯರು, ಪ್ರಾಣಿಗಳಲ್ಲ, ಅವರನ್ನು ಅಪರಾಧಿಗಳಂತೆ ಕೈ-ಕಾಲಿಗೆ ಕೋಳ ಹಾಕಿ ಕರೆತಂದಿದ್ದು ತಪ್ಪು. ಅಮೆರಿಕದಂತಹ ಮುಂದುವರೆದ ದೇಶದಿಂದ ಇಂತಹ ನಡೆ ಖಂಡನೀಯ ಎಂದು ಹೇಳಿದರು.
ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಎಚ್,ಡಿ.ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಕುಮಾರಸ್ವಾಮಿ ನಿಮಗೆ ಜವಾಬ್ದಾರಿ ಇಲ್ಲವೇ? ಸಚಿವರು ನಿಮ್ಮ ಜತೆ ಚರ್ಚೆ ಮಾಡಬೇಕೆ? ಈ ರಾಜ್ಯಕ್ಕೆ ಜವಾಬ್ದಾರಿ ನೀಡಬೇಕು ಎಂದು ನಿಮಗೆ ಜವಾಬ್ದಾರಿ ಇಲ್ಲವೇ? ನಾವು ಪ್ರಧಾನಿ ಹಾಗೂ ಹಣಕಾಸು ಸಚಿವೆ ಹಾಗೂ ನಮಗೆ ಸಂಬಂಧಿಸಿದ ಇಲಾಖೆಯ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಕುಮಾರಸ್ವಾಮಿ ಭೇಟಿ ಮಾಡಲು ಅವರು ವಿತ್ತ ಸಚಿವರಲ್ಲ. ಅವರಿಗೆ ರಾಜ್ಯದ ಬಗ್ಗೆ ಆಸಕ್ತಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ. ಅವರಿಗೆ ಅವರ ವೈಯಕ್ತಿಕ ಆಸಕ್ತಿ ಹೊರತಾಗಿ ರಾಜ್ಯದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ರಾಜ್ಯ ಹಾಗೂ ದೇಶದ ಅಭಿವೃದ್ಧಿ ಬಗ್ಗೆ ಅವರಲ್ಲಿ ನಾನು ಆಸಕ್ತಿ ನೋಡಿಲ್ಲ ಎಂದು ತಿರುಗೇಟು ನೀಡಿದರು.
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ನನ್ನನ್ನು ಭೇಟಿ ಮಾಡುತ್ತಾರೆ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ನನ್ನನ್ನು ಭೇಟಿ ಮಾಡುವುದಿಲ್ಲ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕುರಿತು ಪ್ರತಿಕ್ರಿಯಿಸಿ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ ಎಂದರು.
ಗ್ಯಾರಂಟಿ ಯೋಜನೆ ಕುರಿತ ಟೀಕೆಗಳಿಗೆ ಉತ್ತರಿಸಿ, ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಹೇಳಿದ್ದು ಯಾರು? ಇದು ಜನರ ಬದುಕಿಗೆ ಸರ್ಕಾರ ಕೊಟ್ಟಿರುವ ಶಕ್ತಿ. ಜನರ ಆರ್ಥಿಕ ಹೊರೆ ತಪ್ಪಿಸಲು ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ವರ್ಗದವರಿಗೂ ಆರ್ಥಿಕ ಶಕ್ತಿ ತುಂಬಲು ಪ್ರತಿ ಕ್ಷೇತ್ರಕ್ಕೆ ರೂ. 250 ಕೋಟಿಯಷ್ಟು ಹಣ ನೀಡಲಾಗುತ್ತಿದೆ. ಈ ಯೋಜನೆಗಳಿಗಾಗಿ ರೂ.56 ಸಾವಿರ ಕೋಟಿ ಹಣ ನೀಡಲಾಗಿದ್ದು, ಈ ಯೋಜನೆ ಜನರಿಗಾಗಿ ಮಾಡಲಾಗಿದೆ.
ನಮ್ಮ ಯೋಜನೆಗೆ ಅನುಮತಿ ಕೊಡಿಸಲಿಲ್ಲ. ಆದರೂ ಮಾತು ಮಾತ್ರ ದೊಡ್ಡದಾಗಿ ಆಡುತ್ತಾರೆ. ನಮ್ಮನ್ನು ಟೀಕಿಸಿದರೆ ಅವರಿಗೆ ಆನಂದ. ನಮ್ಮನ್ನು ಟೀಕಿಸಿಯಾದರೂ ಅವರು ಸಂತೋಷ ಪಡುತ್ತಾರಲ್ಲಾ ಅದೇ ನಮಗೆ ತೃಪ್ತಿ ಎಂದು ತಿಳಿಸಿದರು.

Prev Post

ʼಹ್ಯಾಟ್ರಿಕ್‌ʼ ಗೆಲುವಿನತ್ತ ಮುನ್ನುಗಿದ್ದ ಕೇಜ್ರಿವಾಲ್‌ಗೆ ಸೋಲು?

Next Post

ಫೆ.10ರಂದು ಏರೋ ಶೋ ಉದ್ಘಾಟನೆ: ಫೆ.14 ರವರೆಗೆ ರಸ್ತೆ ಸಂಚಾರ ಬಂದ್‌

post-bars

Leave a Comment

Related post