ಎಸ್ಸಿ ಹಾಗೂ ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ ಮೀಸಲಾತಿ
ಬೆಂಗಳೂರು: ಎಸ್ಸಿ ಹಾಗೂ ಎಸ್ಟಿ (SC ST) ಸಮುದಾಯಗಳ ಗುತ್ತಿಗೆದಾರರಿಗೆ ಸರ್ಕಾರದ 2 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು ಈ ಘೋಷಣೆ ಮಾಡಿದರು.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಎರಡು ಕೋಟಿ ರೂ. ಮೊತ್ತದವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಗುತ್ತಿಗೆದಾರರಿಗೆ ಮೀಸಲಾತಿ ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ 29,992 ಕೋಟಿ ರೂ. ಹಾಗೂ ಬುಡಕಟ್ಟುಉಪಯೋಜನೆಗೆ 12,026 ಕೋಟಿ ರೂ.ಗಳೂ ಸೇರಿದಂತೆ ಒಟ್ಟಾರೆ 42,018 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿನ ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಅಗತ್ಯ ಮೂಲಸೌಕರ್ಯ ಕಲಿಸಲು ಪ್ರಗತಿ ಕಾಲೋನಿ ಯೋಜನೆಯಡಿ 2024-25 ನೇ ಸಾಲಿನಲ್ಲಿ 559 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಂಜೂರಾತಿ ನೀಡಲಾಗಿರುತ್ತದೆ ಎಂದು ಬಜೆಟ್ನಲ್ಲಿ ಉಲ್ಲೇಖಿಸಲಾಗಿದೆ.