ಬಜೆಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಲವರಿಗೆ ಅಸಮಾಧಾನ ತಂದಿದೆ ಈ ನಡುವೆ. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದಾರೆ. ಹಲವರ ವಿರೋಧದ ನಡುವೆಯೂ ಸದ್ದಿಲ್ಲದೇ ಸಿದ್ದರಾಮಯ್ಯನವರು ಇಂದಿನ ಬಜೆಟ್ನಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದವರಿಗೆ ನೀಡಿರುವಂತೆ ಮುಸ್ಲಿಮರಿಗೂ ಶೇ 4ರಷ್ಟು ಮೀಸಲಾತಿ ಕಲ್ಪಿಸಿದ್ದಾರೆ.
ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಿದ್ದಾರೆ. ಇದಕ್ಕಾಗಿ ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದರ ಜೊತೆಗೆ ಮುಸ್ಲಿಮರಿಗೂ ಸಹ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ 04ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ಇದು ಮುಸ್ಲಿಂ ಓಲೈಕೆ ಸರ್ಕಾರ ಎಂಬ ಹಣೆ ಪಟ್ಟಿ ಹೊತ್ತಿದೆ.. ಬಿಜೆಪಿಗರು ಕೂಡ ಈ ನಿಟ್ಟಿನಲ್ಲಿ ಟೀಕಿಸಿದ್ದಾರೆ. ಈಗ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡಿರುವುದು ಮತ್ತಷ್ಟು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಹಿಂದೆಯೇ ಸಿಎಂ ಭೇಟಿ ಮಾಡಿದ್ದ ಮುಸ್ಲಿಂ ನಿಯೋಗ
ಕಳೆದ ಜನವರಿಯಲ್ಲಿ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು.
ಬಜೆಟ್ ಅಧಿವೇಶನದಲ್ಲೇ ಇದನ್ನ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದವು, ಸಿಎಂ ಕೂಡ ಅಂದು ಸಕರಾತ್ಮಕವಾಗಿ ಸ್ಪಂದಿಸಿದ್ದು, ಬಜೆಟ್ನಲ್ಲಿ ಘೋಷಿಸಿವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ನಡೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿತ್ತು.
ಆದರೂ ಸಹ ಸದ್ದಿಲ್ಲದೇ ಸಿಎಂ ಸಿದ್ದರಾಮಯ್ಯನವರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ4ರಷ್ಟು ಮೀಸಲಾತಿ ಘೋಷಿಸಿ ಬಿಟ್ಟಿದ್ದಾರೆ.
ಸರ್ಕಾರಿ ಗುತ್ತಿಗೆಯಲ್ಲಿ ಹಾಲಿ ಇರುವ ಮೀಸಲಾತಿ ಎಷ್ಟು ಅಂತ ನೋಡೋದಾದ್ರೆ ಎಸ್ಸಿ-ಎಸ್ಟಿ ಸಮುದಾಯಕ್ಕೆ ಶೇಕಡಾ 24 ರಷ್ಟಿದೆ. ಇನ್ನೂ ಒಬಿಸಿ- ಪ್ರವರ್ಗ 1 ಶೇಕಡಾ 4 ರಷ್ಟು ಮೀಸಲಾತಿ ಇದ್ದರೆ, ಒಬಿಸಿ- ಪ್ರವರ್ಗ 2ಗೆ ಶೇಕಡಾ 15 ರಷ್ಟು ಮೀಸಲಾತಿ ಇದ್ದು ಒಟ್ಟು ಶೇಕಡಾ 43 ರಷ್ಟು ಮೀಸಲಾತಿಯನ್ನು ಕೊಡಲಾಗಿದೆ. ಇದೀಗ ಮುಸ್ಲಿಂ ಹಾಗೂ ಎಸ್ಸಿ-ಎಸ್ಟಿ ಸಮುದಾಯಕ್ಕೂ ಸಹ ಗುತ್ತಿಗೆಯಲ್ಲಿ ಮೀಸಲಾತಿ ಹೆಚ್ಚಿಸಿದೆ.
ಮತ್ತಷ್ಟು ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್ ಸರ್ಕಾರ
ರಾಜ್ಯದಲ್ಲಿ ಈ ಹಿಂದೆ ವಕ್ಫ್ ಆಸ್ತಿ ವಿವಾದದಲ್ಲೇ ಸರ್ಕಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು, ಸರ್ಕಾರ ಮುಸ್ಲಿಂರ ಹಿಂದೆ ಬಿದ್ದಿದೆ. ವೋಟ್ ಬ್ಯಾಂಕ್ಗಾಗಿ ಮುಸ್ಲಿಂ ಓಲೈಕೆ ಮಾಡುತ್ತಿದೆ ಎಂದು ಬಿಜೆಪಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅನಂತರ ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಬೇಕು ಎಂದು ಸರ್ಕಾರ ಮುಂದಾಗಿದ್ದಾಗ ಬಿಜೆಪಿಗರು ಬಿಸಿಮುಟ್ಟಿಸಿದ್ದರು. ಈಗ ಬಜೆಟ್ ಅಧಿವೇಶನದಲ್ಲೇ ಮೀಸಲಾತಿ ಜಾರಿ ತಂದಿದ್ದಾರೆ.